ನವದೆಹಲಿ:
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಶುರುವಾಗಲಿದೆ. ಗುಜರಾತ್, ಹಿಮಾಚಲ ಪ್ರದೇಶದ ಚುನಾವಣಾ ಅಖಾಡದಲ್ಲಿ ಗುದ್ದಾಡಿದ್ದ ರಾಜಕೀಯ ಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲಿ ಸಮರಕ್ಕೆ ಭರ್ಜರಿ ತಯಾರಿ ಮಾಡಿಕೊಂಡಿವೆ. ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಮೀಸಲಾತಿ ಮತ್ತು ಭಾರತ–ಚೀನಾ ಗಡಿ ಸಂಘರ್ಷ ಅಸ್ತ್ರಗಳನ್ನು ಹಿಡಿದು ಕಾಂಗ್ರೆಸ್ ನೇತೃತ್ವದಲ್ಲಿ ಹೋರಾಟಕ್ಕೆ ಪ್ರತಿಪಕ್ಷಗಳು ಸಜ್ಜಾಗಿವೆ. ವಿಪಕ್ಷಗಳಿಗೆ ತಿರುಗೇಟು ಕೊಡಲು ಸರ್ಕಾರವೂ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಡಿಸೆಂಬರ್ 29ರವರೆಗೆ ಸಂಸತ್ ಅಧಿವೇಶನ ನಡೆಯಲಿದೆ. 16 ಬಿಲ್ಗಳನ್ನು ಪಾಸ್ ಮಾಡಿಕೊಳ್ಳಲು ಸರ್ಕಾರ ತಯಾರಿ ಮಾಡಿಕೊಂಡಿದೆ. ಶಿವಸೇನೆಯ ಏಕನಾಥ್ ಶಿಂಧೆ ಬಣದ ಸಂಸದರು ಜನಸಂಖ್ಯಾ ನಿಯಂತ್ರಣ ಕಾಯ್ದೆ ಮಂಡಿಸಲು ಸಜ್ಜಾಗಿದ್ದಾರೆ. ಆಪ್ ಸಂಸದ ಸಂಜಯ್ ಸಿಂಗ್ ಓಲ್ಡ್ ಪೆನ್ಷನ್ ಸ್ಕೀಂ ವಿಚಾರದ ಮೇಲೆ ಚರ್ಚೆಗೆ ಸಜ್ಜಾಗಿದ್ದಾರೆ, ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೆಜ್ಜೆ ಹಾಕ್ತಿರೋದ್ರಿಂದ ಅಧಿವೇಶನಕ್ಕೆ ಬರೋದು ಡೌಟ್. ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಜ್ಜಾಗಿದ್ದಾರೆ. ಲೋಕಸಭೆಯಲ್ಲಿ ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌಧರಿ ಲೀಡ್ ಮಾಡೋ ಸಾಧ್ಯತೆ ಇದೆ.